ಹೈಲೈಟ್ಸ್:
- ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಮಂಜುನಾಥ್ ಗೆಲ್ಲಿಸಲು ಅಮಿತ್ ಶಾ ರಣತಂತ್ರ
- ಚೆನ್ನಪಟ್ಟಣದಲ್ಲಿ ರೋಡ್ ಶೋ ನಡೆಸಿದ ಬಳಿಕ ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ಜೊತೆ ಜಂಟಿ ಸಭೆ
- ಡಿಕೆ ಸುರೇಶ್ ಭದ್ರನೆಲೆಯನ್ನು ಈ ಬಾರಿ ಕಸಿದುಕೊಳ್ಳಲೇಬೇಕು ಎಂಬ ಹಟಕ್ಕೆ ಬಿದ್ದಿರುವ ಮೈತ್ರಿ ಪಡೆ
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ ಬೆಂಗಳೂರು ಗ್ರಾಮಾಂತರ ಸದ್ಯ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಈ ಕ್ಷೇತ್ರದಲ್ಲಿ ಕಮಲ ಅರಳಿಸಲು ಬಿಜೆಪಿ ಹಾಗೂ ಜೆಡಿಎಸ್ ರಣತಂತ್ರ ರೂಪಿಸುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಭೇಟಿಯ ಸಂದರ್ಭದಲ್ಲೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಗೆಲುವಿಗೆ ಸ್ಪಷ್ಟ ಸೂಚನೆಗಳನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಬೆಂಗಳೂರು ಗ್ರಾಮಾಂತರದಲ್ಲೇ ಚಾಲನೆ ನೀಡಿದ್ದ ಅಮಿತ್ ಶಾ ಇದೇ ಸಂದರ್ಭದಲ್ಲಿ ಡಿಕೆ ಸಹೋದರರ ಭದ್ರಕೋಟೆಯಲ್ಲಿ ರೋಡ್ ಶೋ ಮಾಡುವ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದರು. ಚನ್ನಪಣ್ಣದಲ್ಲೇ ಚುನಾವಣಾ ಪ್ರಚಾರದ ರಣಕಹಳೆ ಊದಿದ್ದರು. ಇದಾದ ಬಳಿಕ ರಾಜ್ಯ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ಜೊತೆಗೆ ಜಂಟಿ ಸಭೆಯನ್ನು ನಡೆಸಿದ್ದರು.
28 ಕ್ಷೇತ್ರಗಳ ಪೈಕಿ ಕಳೆದ ಬಾರಿ ಕಾಂಗ್ರೆಸ್ಗೆ ಉಸಿರು ನೀಡಿದ್ದು ಬೆಂಗಳೂರು ಗ್ರಾಮಾಂತರ ಕ್ಷೇತ್ರ. ಡಿಕೆ ಸುರೇಶ್ ಭದ್ರನೆಲೆಯನ್ನು ಈ ಬಾರಿ ಹೇಗಾದರೂ ಮಾಡಿ ಕಸಿದುಕೊಳ್ಳಲೇಬೇಕು ಎಂಬ ಹಟಕ್ಕೆ ಬಿಜೆಪಿ ಮತ್ತು ಜೆಡಿಎಸ್ ಬಿದ್ದಿದೆ. ಈ ಕ್ಷೇತ್ರದ ಚುನಾವಣಾ ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ರಾಜ್ಯದ ಮುಂದಿನ ರಾಜಕೀಯವೂ ನಿಂತಿದೆ ಎಂದೇ ವ್ಯಾಖ್ಯಾನಿಸಲಾಗುತ್ತಿದೆ.
ಸೂಕ್ತ ರಣನೀತಿ ರೂಪಿಸಲು ಶಾ ಒತ್ತು
ಎಲ್ಲಾ ಲೋಕಸಭಾ ಕ್ಷೇತ್ರಗಳ ಜೊತೆಗೆ ಬೆಂಗಳೂರು ಗ್ರಾಮಾಂತರದಲ್ಲೂ ಸೂಕ್ತ ರಣನೀತಿ ರೂಪಿಸುವಂತೆ ಅಮಿತ್ ಶಾ ರಾಜ್ಯ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಸೂಚನೆ ನೀಡಿದ್ದಾರೆ. ಕಾಂಗ್ರೆಸ್ ಪ್ರಬಲ ನೆಲೆಯಾಗಿರುವ ಈ ಕ್ಷೇತ್ರಕ್ಕೆ ಪ್ರಚಾರ ಹಾಗೂ ಮತದಾರರ ಗಮನ ಸೆಳೆಯುವ ನಿಟ್ಟಿನಲ್ಲಿ ಹೆಚ್ಚಿನ ಆದ್ಯತೆ ನೀಡಿ ಎಂಬ ಸೂಚನೆಯನ್ನೂ ನೀಡಿದ್ದಾರೆ ಎನ್ನಲಾಗಿದೆ.
ಎಚ್ಚರ ವಹಿಸುತ್ತಿರುವ ಕಾಂಗ್ರೆಸ್
ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಹೆಚ್ಚಿನ ಒತ್ತು ನೀಡುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೂಡಾ ಎಚ್ಚರಿಕೆಯ ಹೆಜ್ಜೆಯನ್ನು ಇಡುತ್ತಿದೆ. ಡಿಕೆ ಸಹೋದರರು ಹಾಗೂ ಅವರ ಆಪ್ತ ಬಣದ ಶಾಸಕರು ಬಿಜೆಪಿಯ ತಂತ್ರಗಾರಿಕೆಗೆ ಪ್ರತಿತಂತ್ರವನ್ನು ರೂಪಿಸುತ್ತಿದ್ದಾರೆ. ತಮ್ಮ ಹೇಳಿಕೆಗಳು ಹಾಗೂ ರಣತಂತ್ರದಲ್ಲಿ ಎಚ್ಚರಿಕೆಯ ಹೆಜ್ಜೆಯನ್ನು ಇಡುತ್ತಿದ್ದಾರೆ. ಯಾವುದೇ ರೀತಿಯಲ್ಲಿ ವೈಯಕ್ತಿಕವಾಗಿ ಅಭ್ಯರ್ಥಿಯ ಕುರಿತಾಗಿ ವಿವಾದಾತ್ಮಕ ಹೇಳಿಕೆಗಳನ್ನು ನೀಡದಂತೆಯೂ ಶಾಸಕರಿಗೆ ಸೂಚನೆಯನ್ನು ನೀಡಲಾಗಿದೆ ಎಂಬ ಮಾಹಿತಿಯೂ ಇದೆ.
ಶಾ ಭೇಟಿಯಿಂದ ಬೂಸ್ಟ್
ಅಮಿತ್ ಶಾ ಭೇಟಿ ಹಾಗೂ ರೋಡ್ ಶೋಗೆ ಚನ್ನಪಟ್ಟಣದಲ್ಲಿ ಉತ್ತರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸಾಕಷ್ಟು ಸಂಖ್ಯೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಈ ರೋಡ್ ಶೋನಲ್ಲಿ ಭಾಗಿಯಾಗಿದ್ದರು. ಸಹಜವಾಗಿ ಶಾ ಪ್ರಚಾರ ಕ್ಷೇತ್ರದ ಪಕ್ಷದ ಕಾರ್ಯಕರ್ತರನ್ನು ಹೊಸ ಹುರುಪನ್ನು ನೀಡಿದೆ.
ಬೆಂಗಳೂರಿನಲ್ಲಿ 5 ಲೋಕಸಭಾ ಕ್ಷೇತ್ರಗಳ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಬಳಿಕ ಅಮಿತ್ ಶಾ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದರು. ಈ ವೇಳೆ ಅವರ ಜೊತೆಗೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಇದ್ದರು.
+ There are no comments
Add yours