ಮೇ ಅಂತ್ಯದವರೆಗೆ ಬಿಸಿಲು, ಬಿಸಿಗಾಳಿ : ಯಾವ ರೀತಿ ಮುನ್ನೆಚ್ಚರಿಕೆ ಅಗತ್ಯ

0 min read

ರಾಮನಗರ :  ಜಿಲ್ಲೆಯಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್ ವೇವ್ (ಶಾಖದ ಹೊಡೆತ) ಸ್ಟೋಕ್ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿರುವುದರಿಂದ ಎಲ್ಲಾ ಸಾರ್ವಜನಿಕರಿಗೆ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಅವಿನಾಶ್‍ ಮೆನನ್‍ ರಾಜೇಂದ್ರನ್ ಸಲಹೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಭಾರತೀಯ ಹವಾಮಾನ ಇಲಾಖೆ ಪ್ರಸ್ತುತ ಮೇ ಅಂತ್ಯದವರೆಗೆ ಸೂರ್ಯನ ಬಿಸಿಲು ಮತ್ತು ಬಿಸಿಗಾಳಿ ಹೆಚ್ಚಾಗುವ ಬಗ್ಗೆ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಬಿಸಿಲು ದಿನಗಳಲ್ಲಿ ಕೊಡೆ/ಛತ್ರಿ ಬಳಸಲು ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯುವಂತೆ ಸೂಚಿಸಿದೆ. ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸುವುದು, ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳೆಯದು ಎಂದು ತಿಳಿಸಿದ್ದಾರೆ.

ಹತ್ತಿ ಅಥವಾ ಟರ್ಬನ್ ಟೋಪಿ ಹಾಗೂ ಕೂಲಿಂಗ್ ಗ್ಲಾಸ್ ಧರಿಸಿರಿ, ಹಿರಿಯ ನಾಗರಿಕರು ಹಾಗೂ ಮಕ್ಕಳು ಹೆಚ್ಚು ನೀರು ಕುಡಿಯಿರಿ. ಬೆಳ್ಳಿಗೆ 11ರಿಂದ ಸಂಜೆ 4 ರವರೆಗೆ ಹೊರಾಂಗಣ ದೈಹಿಕ ಚಟುವಟಿಕೆಯನ್ನು ಕಡಿಮೆ ಮಾಡಲು ಪ್ರಯತ್ನಿಸಿ. ಸಾಕಷ್ಟು ನೀರು ಕುಡಿಯಿರಿ, ಮಜ್ಜಿಗೆ ಮತ್ತು ಗ್ಲೂಕೋಸ್/ಓ.ಆರ್.ಎಸ್ ನಂತಹ ದ್ರವ ಪದಾರ್ಥಗಳನ್ನು ಹೆಚ್ಚು ಉಪಯೋಗಿಸಿ ಎಂದು ಸಲಹೆ ನೀಡಿದ್ದಾರೆ.

ಕೊಠಡಿಯ ತಾಪಮಾನವನ್ನು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ, ಹೀಟ್ ಸ್ಟೋಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸಿ. ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಕನಿಷ್ಠ ಬಟ್ಟಿಯನ್ನು ಹೊಂದಿರುವಂತೆ ನೋಡಿಕೊಂಡು. ವ್ಯಕ್ತಿಗೆ ತಣ್ಣೀರಿನಿಂದ ಸ್ಪಾಂಜ್ ಬಾತ್ ನೀಡಬೇಕು ಅಥವಾ ಐಸ್ ಪ್ಯಾಕ್ ಗಳನ್ನು ಉಪಯೋಗಿಸಬಹುದು ಅಥವಾ ವ್ಯಕ್ತಿಯನ್ನು ಐಸ್ ಪ್ಯಾಕ್ ಗಳ ಮಧ್ಯ ಇಡಬಹುದು ಎಂದು ತಿಳಿಸಿದ್ದಾರೆ.

ಹೀಟ್ ವೇವ್ ಸ್ಟ್ರೋಕ್‌ಗೆ ಒಳಗಾದ ವ್ಯಕ್ತಿಗೆ ಯಾವುದೇ ಸುಧಾರಣೆ ಕಂಡುಬರದಿದ್ದರೆ, ಅವರನ್ನು ಕೂಲಿಂಗ್ ವ್ಯವಸ್ಥೆಯೊಂದಿಗೆ ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಬೇಕು. ಆಹಾರದಲ್ಲಿ ಮಸಾಲೆ ಪದಾರ್ಥಗಳನ್ನು ಹೆಚ್ಚು ಬಳಸಬಾರದು. ಬೇಸಿಗೆ ದಿನಗಳಲ್ಲಿ ತಣ್ಣೀರಿನ ಸ್ನಾನ ಮಾಡುವುದೇ ಒಳ್ಳೆಯದು ಹಾಗೂ ಹೊರಾಂಗಣದಲ್ಲಿ ಬಿಸಿಲಿನಲ್ಲಿ ಕೆಲಸ ಮಾಡುವವರಿಗೆ ಕಡ್ಡಾಯ ವಿರಾಮ ನಿಗದಿಪಡಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You May Also Like

More From Author

+ There are no comments

Add yours