ರಾಜ್ಯ ಸರ್ಕಾರದ ಮೊದಲ ವಿಕೆಟ್‌ ಪತನ? ಸಚಿವ ಬಿ ನಾಗೇಂದ್ರ ತಲೆದಂಡ ಸಾಧ್ಯತೆ, ದಿಲ್ಲಿಯಲ್ಲಿ ಸಿಎಂ – ಡಿಸಿಎಂ ಮಹತ್ವದ ಚರ್ಚೆ

0 min read

ಹೈಲೈಟ್ಸ್‌:

  • ರಾಜ್ಯ ಸರ್ಕಾರದ ಮೊದಲ ವಿಕೆಟ್‌ ಪತನ? ಸಚಿವ ಬಿ ನಾಗೇಂದ್ರ ಶೀಘ್ರ ರಾಜೀನಾಮೆ ಸಾಧ್ಯತೆ
  • ಮಲ್ಲಿಕಾರ್ಜುನ ಖರ್ಗೆ ಜೊತೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಚರ್ಚೆ
  • ಇನ್ನೆರಡು ದಿನದಲ್ಲಿ ಬಿ ನಾಗೇಂದ್ರ ರಾಜೀನಾಮೆ ಬಗ್ಗೆ ಅಂತಿಮ ನಿರ್ಧಾರ

ಬೆಂಗಳೂರು / ಶಿವಮೊಗ್ಗ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಮೊದಲ ವಿಕೆಟ್‌ ಪತನಕ್ಕೆ ಕ್ಷಣಗಣನೆ ಶುರುವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ ನಾಗೇಂದ್ರ ಅವರ ತಲೆದಂಡ ಆಗುವ ಸಾಧ್ಯತೆ ನಿಚ್ಚಳವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ ಬೆನ್ನಲ್ಲೇ ಪ್ರತಿಪಕ್ಷಗಳು ಸಚಿವರ ರಾಜೀನಾಮೆಗೆ ಆಗ್ರಹಿಸುತ್ತಿವೆ. ಈ ಹಿನ್ನೆಲೆ ಸರ್ಕಾರದ ಮೇಲೆ ಒತ್ತಡ ಸೃಷ್ಟಿಯಾಗಿದ್ದು, ಮುಖ್ಯಮಂತ್ರಿಗಳು ನಾಗೇಂದ್ರ ರಾಜೀನಾಮೆ ಪಡೆಯುವ ಸಾಧ್ಯತೆ ಹೆಚ್ಚಿದೆ.

ವಿಧಾನ ಪರಿಷತ್‌ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ದಿಲ್ಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಧಿಕಾರಿಯ ಆತ್ಮಹತ್ಯೆ ಹಾಗೂ ಸಂಭವನೀಯ ಪರಿಣಾಮಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ನೀಡಲಾಗಿದ್ದು, ಒಂದು ಅಥವಾ ಎರಡು ದಿನದಲ್ಲಿ ಅಂತಿಮ ನಿರ್ಧಾರವನ್ನು ಸಿಎಂ ತೆಗೆದುಕೊಳ್ಳುವ ನಿರೀಕ್ಷೆ ಇದೆ.

ಬಿಜೆಪಿಯು ಕೆಎಸ್‌ ಈಶ್ವರಪ್ಪ ಅವರ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿದೆ. ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣದಲ್ಲಿ ಕೆಎಸ್‌ ಈಶ್ವರಪ್ಪ ರಾಜೀನಾಮೆ ನೀಡಿದ್ದರು. ಅದೇ ರೀತಿಯ ಘಟನೆ ಈಗ ನಡೆದಿದ್ದು, ಸಚಿವ ಬಿ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಒತ್ತಡ ಹೇರುತ್ತಿವೆ. ಈ ಬಗ್ಗೆ ನಿರಂತರ ಸುದ್ದಿಗೋಷ್ಠಿಗಳನ್ನು, ಪ್ರತಿಭಟನೆಗಳನ್ನು ಮಾಡುತ್ತಿರುವ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡುತ್ತಿದೆ.

ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರು, ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ದುರದೃಷ್ಟಕರ, ಈ ರೀತಿ ಆಗಬಾರದಿತ್ತು. ಡೆತ್‌ ನೋಟ್‌ನಲ್ಲಿ ಉಲ್ಲೇಖವಾಗಿರುವ ಹೆಸರಿನ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ನಾಗೇಂದ್ರ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತು ಎಂದು ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಸೇರಿ ಹಲವು ನಾಯಕರು ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಡಬಲ್‌ ಸ್ಟ್ಯಾಂಡರ್ಡ್‌ ಆಯ್ತಾ ಕಾಂಗ್ರೆಸ್‌?

ಬೆಳಗಾವಿಯ ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಕೆಎಸ್‌ ಈಶ್ವರಪ್ಪ ಹೆಸರು ಕೇಳಿಬಂದಿತ್ತು. ಆಗ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್‌ ಬೃಹತ್‌ ಹೋರಾಟ ನಡೆಸಿತ್ತು. ಈ ಹಿನ್ನೆಲೆ ಸರ್ಕಾರದ ಮೇಲೆ ಒತ್ತಡ ಸೃಷ್ಟಿಯಾಗಿ ಈಶ್ವರಪ್ಪ ರಾಜೀನಾಮೆ ನೀಡಿದ್ದರು. ಆದರೆ, ಈಗ ಅವತ್ತು ಹೋರಾಟ ಮಾಡಿದ್ದ ಕಾಂಗ್ರೆಸ್‌ನ ಸಚಿವರ ಮೇಲೆಯೇ ನೇರ ಆರೋಪ ಬಂದಿದ್ದು, ರಾಜೀನಾಮೆ ಪಡೆಯಲು ಸಿಎಂ ಸಿದ್ದರಾಮಯ್ಯ ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಕೆಎಸ್‌ ಈಶ್ವರಪ್ಪ ಹೇಳಿದ್ದಾರೆ.

ನನ್ನ ರಾಜೀನಾಮೆಗಾಗಿ ಅವರು ಪ್ರತಿಭಟನಾ ರ‍್ಯಾಲಿಗಳನ್ನು ನಡೆಸಿದರು. ಈಗ ಯಾಕೆ ಈ ದ್ವಂದ್ವ ನೀತಿ? ನಾಗೇಂದ್ರ ಅವರ ರಾಜೀನಾಮೆ ಪಡೆಯಲಿ. ತನಿಖೆ ನಡೆಸಿ ನಾಗೇಂದ್ರ ತಪ್ಪಿತಸ್ಥರಲ್ಲ ಎಂದು ಸಾಬೀತಾದರೆ ಅವರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳಲಿ. ಅಪರಾಧ ಮಾಡುವವರ ಜೊತೆ ನಿಲ್ಲುವ ಮುಖ್ಯಮಂತ್ರಿ ನಮ್ಮಲ್ಲಿದ್ದಾರೆ ಎಂದು ಕೆಎಸ್‌ ಈಶ್ವರಪ್ಪ ಹೇಳಿದ್ದಾರೆ.

ಏನಿದು ಪ್ರಕರಣ?

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಖಾತೆಗಳ ಅಧೀಕ್ಷಕರಾಗಿದ್ದ ಪಿ ಚಂದ್ರಶೇಖರ್ ಭಾನುವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆತ್ಮಹತ್ಯೆ ಬಳಿಕ ನಿಗಮದಲ್ಲಿ 87 ಕೋಟಿ ರೂ.ಗಳ ಹಗರಣ ಬಯಲಿಗೆ ಬಂದಿದೆ. ಪಿ ಚಂದ್ರಶೇಖರ್‌ ಅವರ ಡೆತ್‌ ನೋಟ್‌ ಕೂಡ ಸಿಕ್ಕಿದ್ದು, ಅದರಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆಜಿ ಪದ್ಮನಾಭ್‌, ಅಕೌಂಟ್ಸ್‌ ಆಫೀಸರ್‌ ಪರಶುರಾಮ್ ದುರುಗಣ್ಣನವರ್ ಮತ್ತು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ವ್ಯವಸ್ಥಾಪಕಿ ಸುಚಿಸ್ಮಿತಾ ರಾವಲ್ ಅವರ ಹೆಸರು ಡೆತ್‌ ನೋಟ್‌ನಲ್ಲಿದೆ. ಅದಲ್ಲದೇ ಹಣವನ್ನು ವರ್ಗಾಯಿಸಲು ಸಚಿವರು ಮೌಖಿಕ ಆದೇಶವನ್ನು ನೀಡಿದ್ದಾರೆ ಎಂದು ಕೂಡ ಡೆತ್‌ ನೋಟ್‌ನಲ್ಲಿ ಹೇಳಲಾಗಿದೆ.

You May Also Like

More From Author

+ There are no comments

Add yours