ಹಿಜಾಬ್ ನಿಷೇಧ ವಾಪಸ್ ಸೂಚನೆ ಹಿಂದೆ ದೊಡ್ಡ ಕುತಂತ್ರ : ಆರ್‌. ಅಶೋಕ್ ಕಿಡಿ

1 min read

ಹೈಲೈಟ್ಸ್‌:

  • ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ ಬಂದಿರುವುದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೊಡ್ಡ ಕುತಂತ್ರ ಅಡಗಿದೆ
  • ಸಿಎಂ ಸಿದ್ದರಾಮಯ್ಯ ವಿರುದ್ಧ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ಸಾಮಾಜಿಕ ಜಾಲತಾಣದಲ್ಲಿ ವಾಗ್ದಾಳಿ ನಡೆಸಿದ್ದಾರೆ
  • ಹಿಜಾಬ್ ನಿಷೇಧವನ್ನು ವಾಪಸ್ ಪಡೆದುಕೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದರು

ಬೆಂಗಳೂರು: ಹಿಜಾಬ್ ನಿಷೇಧ ವಾಪಸ್ ಸೂಚನೆ ಹಿಂದೆ ದೊಡ್ಡ ಕುತಂತ್ರ ಇದೆ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತಾಗಿ ಎಕ್ಷ್ ಖಾತೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ ಬಂದಿರುವುದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೊಡ್ಡ ಕುತಂತ್ರ ಅಡಗಿದೆ. ಗ್ಯಾರೆಂಟಿಗಳಿಂದ ಬರಿದಾದ ಖಜಾನೆ, ಅನುದಾನಕ್ಕಾಗಿ ಶಾಸಕರ ಒತ್ತಡ, ನಿಗಮ ಮಂಡಳಿ ನೇಮಕಾತಿ, ಮಕಕ್ಕೆ ಸೊಪ್ಪು ಹಾಕದ ಹೈಕಮಾಂಡ್ ಇವೆಲ್ಲದರಿಂದ ತಾವೇ ಸೃಷ್ಟಿಸಿಕೊಂಡ ಚಕ್ರವ್ಯೂಹದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದಾಮಯ್ಯನವರು ಹಿಜಾಬ್ ವಿಷಯವನ್ನು ಪ್ರಸ್ತಾಪಿಸಿ ಜನರನ್ನು ದಿಕ್ಕು ತಪ್ಪಿಸಲು ಹೊರಟಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ವಿಧಾನಸಭೆ ಅಧಿವೇಶನದ ನಡೆಯುತ್ತಿದ್ದ ಸಂದರ್ಭದಲ್ಲೇ ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ದಾರುಣ ಘಟನೆ, ಮಾಲೂರಿನ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಗೊಳಿಸಿದ ಹೃದಯ ವಿದ್ರಾವಕ ಘಟೆನೆ – ಹೀಗೆ ಸಾಲು ಸಾಲು ವೈಫಲ್ಯಗಳು, ಒಂದರ ಮೇಲೊಂದು ವಿವಾದಗಳು, ಒಳಜಗಳದ ಮುಜುಗರದಿಂದ ಜನತೆಗೆ ಮುಖ ತೋರಿಸಲೂ ಆಗದಂತಹ ದುಸ್ಥಿತಿಗೆ ತಲುಪಿರುವ ಕಾಂಗ್ರೆಸ್ ಸರ್ಕಾರ ಈಗ ಹಿಜಾಬ್ ಮುಖವಾಡ ಹಾಕಿಕೊಂಡು ಜನರ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಓದುವ ಮಕ್ಕಳಲ್ಲಿ ಸಮಾನತೆಯ ಭಾವನೆ ಮೂಡಿಸುವ ಸಮವಸ್ತ್ರ ಬಿಟ್ಟು, ಧರ್ಮದ ಹೆಸರಿನಲ್ಲಿ ಎಳೆಯ ಮನಸ್ಸುಗಳನ್ನು ಒಡೆಯುವ ಹಿಜಾಬ್ ವಿಷಯವನ್ನ ಮತ್ತೆ ಕೆದಕುತ್ತಿರುವುದೇಕೆ? ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ಪಕ್ಷ ತುಷ್ಟೀಕರಣದ ರಾಜಕೀಯಕ್ಕೆ ಮೊರೆ ಹೋಗಿದೆ. ಕನ್ನಡಿಗರು ಇದಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ಹಿಜಾಬ್ ನಿಷೇಧ ವಾಪಸ್ ಪಡೆಯುವ ಬಗ್ಗೆ ಹೇಳಿಕೆ ನೀಡಿದ್ದರು. ಉಡುಪು- ಆಹಾರ ಅವರವರ ಇಷ್ಟ ಎಂದು ಹೇಳಿಕೆ ನೀಡಿದ್ದರು. ಅಲ್ಲದೆ ಹಿಜಾಬ್ ನಿಷೇಧ ವಾಪಸ್ ಪಡೆದುಕೊಳ್ಳುವುದಾಗಿ ತಿಳಿಸಿದ್ದರು.

You May Also Like

More From Author

+ There are no comments

Add yours